ಎಸ್ಸಿ ಎಸ್ಟಿ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರಿಂದ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ಮತ್ತು ಪರಿಶೀಲನೆ: ಪ್ರಕರಣವನ್ನು ನ್ಯಾಯಯುತವಾಗಿ ನಡೆಸಲು ಸೂಚನೆ- ಡಾ.ಮೂರ್ತಿ ಎಲ್. ಜಯ ಧ್ವಜ ನ್ಯೂಸ್ ,ರಾಯಚೂರು ಆ. 30- ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ಡಾ.ಮೂರ್ತಿ ಎಲ್. ಮತ್ತು ಸದಸ್ಯರಾದ ಸುನೀಲ್ ಎಂ.ಉಕ್ಕಲಿ, ಎನ್.ದಿವಾಕರ್, ಗೀತಾ ಥಾಂವಶಿ ಹಾಗೂ ಕಾರ್ಯದರ್ಶಿ ಡಾ.ಹೆಚ್.ಎಸ್.ಶಿವರಾಮು ಅವರು ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಪ್ರವಾಸದಲ್ಲಿದ್ದು, ರವಿವಾರ ಮೊದಲ ದಿನ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ನಡೆದ ಕೊಲೆ ಪ್ರಕರಣ ವಿಚಾರದ ಬಗ್ಗೆ ಸ್ಥಳ ಪರಿಶೀಲನೆ ನಡೆಸಿದರು. ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ವಸತಿ ಗೃಹದಿಂದ ನೇರವಾಗಿ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮಕ್ಕೆ ಭೇಟಿ ನೀಡಿ, ಮೃತ ಕು.ಅಶ್ವಿನಿ ಎಂಬುವವರ ಅತ್ಯಾಚಾರ ಹಾಗೂ ಕೊಲೆ ವಿಚಾರದ ಬಗ್ಗೆ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರಿಂದ ಸ್ಥಳ ಪರಿಶೀಲನೆ ನಡೆಸಿದರು. ಅವರು ಮನೆಗೆ ಭೇಟಿ ನೀಡಿ ಮೃತ ಕು.ಅಶ್ವಿನಿ ಅವರ ಭಾವಚಿತ್ರಕ್ಕೆ ವಿವಿಧ ಗಣ್ಯರಿಂದ ಪುಷ್ಪ ನಮನ ಸಲ್ಲಿಸಿದ ನಂತರ ಆಯೋಗದ ಅಧ್ಯಕ್ಷರಿಂದ ಕುಟುಂಬದ ಮಾಹಿತಿ ಪಡೆದರು. ಈ ವೇಳೆ ಆಯೋಗದ ಅಧ್ಯಕ್ಷರು ಮಾತನಾಡಿ, ಪ್ರಕರಣದಡಿ ಆರೋಪಿಗಳಿಗೆ ಕಾನೂನು ಪ್ರಕಾರ ಕಠಿಣವಾದ ಶಿಕ್ಷೆಯಾಗಲಿದೆ. ಯಾರು ಭಯ ಪಡುವ ಅವಶ್ಯಕತೆ ಇಲ್ಲ...