ಪತ್ರಕರ್ತ ಸೋಮಣ್ಣ ಗುರಿಕಾರ ನಿಧನಕ್ಕೆ ಪತ್ರಿಕಾ ಭವನದಲ್ಲಿ ಶ್ರದ್ಧಾಂಜಲಿ ಜಯ ಧ್ವಜ ನ್ಯೂಸ್ ,ರಾಯಚೂರು, ಮೇ.19 - ಹಿರಿಯ ಪತ್ರಕರ್ತ ಸೋಮಣ್ಣ ಗುರಿಕಾರ ನಿಧನ ಹಿನ್ನೆಲೆಯಲ್ಲಿ ನಗರದ ಪತ್ರಿಕಾ ಭವನದಲ್ಲಿ ಇಂದು ಶ್ರದ್ಧಾಂಜಲಿ ಸಭೆ ನಡೆಸಲಾಯಿತು. ಮೊದಲಿಗೆ ಒಂದು ನಿಮಿಷ ಮೌನಾಚರಣೆ ಸಲ್ಲಿಸಲಾಯಿತು. ಬಳಿಕ ಸೋಮಣ್ಣ ಗುರಿಕಾರ ಅವರ ಭಾವಚಿತ್ರಕ್ಕೆ ಪತ್ರಕರ್ತರು ಪುಷ್ಪನಮನ ಸಲ್ಲಿಸಿ ಗೌರವ ಸೂಚಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆರ್.ಗುರುನಾಥ ಮಾತನಾಡಿ, ಸೋಮಣ್ಣ ಅವರು ಹಟ್ಟಿ ಚಿನ್ನದ ಗಣಿ ಪಟ್ಟಣದಲ್ಲಿ ಕಳೆದ 20 ವರ್ಷಗಳಿಂದ ಒಂದೇ ಸಂಸ್ಥೆಯಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದರು. ಅನೇಕ ಜನಪರ ವರದಿಗಳನ್ನು ಮಾಡಿ ಗಮನ ಸೆಳೆದಿದ್ದರು. ಅವರು ಕಾರ್ಮಿಕರ ಕುಟುಂಬದಿಂದ ಬಂದವರಾಗಿದ್ದು, ಪತ್ರಿಕಾ ವೃತ್ತಿಯಲ್ಲಿ ನಿಷ್ಠೆಯಿಂದ ಕೆಲಸ ಮಾಡಿದ್ದರು ಎಂದು ಸ್ಮರಿಸಿದರು. ಕಳೆದ ಐದು–ಆರು ವರ್ಷಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಈ ವೇಳೆ ಸ್ನೇಹಿತರು ಹಾಗೂ ಸಹೋದ್ಯೋಗಿಗಳು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ಮೂಲಕ ನೆರವಾಗಿದ್ದರು. ಸಿಎಂ ನಿಧಿ ಸೇರಿದಂತೆ ಹಲವರ ಸಹಾಯದಿಂದ ಚಿಕಿತ್ಸೆಗಾಗಿ ಆರ್ಥಿಕ ನೆರವು ಒದಗಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿರುವುದು ದುಃಖಕರ ಸಂಗತಿ ಎಂದರು. ಪತ್ರಕರ್ತರ ವೃತ್ತಿಯಲ್ಲಿ ಭದ್ರತೆಯ ಕೊರತೆ ಇದೆ. ಆರೋಗ್ಯ ಸಮಸ್ಯೆಗಳಿದ್ದರೂ ಅನೇಕ...