ಜಿಲ್ಲಾಡಳಿತದಿಂದ ಡಿ.ದೇವರಾಜ ಅರಸುರವರ 110ನೇ ಜಯಂತಿ ಆಚರಣೆ:
ಡಿ.ದೇವರಾಜ ಅರಸು ವಿಚಾರಧಾರೆಗಳು ಇಂದಿಗೂ ಪ್ರಸ್ತತ- ಅಪರ ಜಿಲ್ಲಾಧಿಕಾರಿ ಶಿವಾನಂದ
ಜಯ ಧ್ವಜ ನ್ಯೂಸ್ ,ರಾಯಚೂರು, ಆ. 20- ಹಿಂದುಳಿದ ವರ್ಗದವರ ಏಳಿಗೆಗೆ ಕಾಳಜಿ ವಹಿಸಿ ರಾಜ್ಯದಲ್ಲಿ ಮಹತ್ವದ ಬದಲಾವಣೆಗೆ ಶ್ರಮಿಸಿದ ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸು ಅವರ ವಿಚಾರಧಾರೆಗಳನ್ನು ಯುವಪೀಳಿಗೆಯು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಹೇಳಿದರು.
ಅವರಿಂದು ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಡೆದ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸು ಅವರ 110ನೇ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ರಾಜ್ಯದ ಮುಖ್ಯಮಂತ್ರಿಗಳಾಗಿ ದೀರ್ಘಕಾಲ ಆಡಳಿತ ನಡೆಸಿ, ಹಿಂದುಳಿದ ವರ್ಗದವವರನ್ನು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಯೊಂದಿಗೆ ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಅರಸು ಅವರು ಪ್ರಮುಖ ಪಾತ್ರ ವಹಿಸಿದ್ದಾರೆ.
ಉಳುವವನೇ ಭೂಮಿ ಒಡೆಯ ಕಾರ್ಯಕ್ರಮದ ಜಾರಿ ತಂದು ಭೂಮಿಯನ್ನು ಉಳುವವರನ್ನೇ ಆ ಹೊಲದ ಒಡೆಯರನ್ನಾಗಿ ಮಾಡಿದರು ಎಂದು ತಿಳಿಸಿದರು.
ಅರಸು ಅವರು ಜಾರಿ ಮಾಡಿದ ಭೂಸುಧಾರಣೆ ಕಾರ್ಯಕ್ರಮದಿಂದಾಗಿ ಇಂದು ಅಸಂಖ್ಯೆ ರೈತರ ಬಾಳಲ್ಲಿ ಹೊಸ ಆಶಾಕಿರಣ ಮೂಡಿದೆ.
ಹಾಸ್ಟೆಲ್ಗಳ ನಿರ್ಮಾಣ ಮತ್ತು ಮೀಸಲಾತಿ ನೀಡಿಕೆಯ ಕ್ರಮಗಳಿಂದಾಗಿ ಇಂದು ಗ್ರಾಮೀಣ ಭಾಗದಿಂದ ನಗರ ಪ್ರದೇಶಕ್ಕೆ ಬರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಓದಿಗೆ ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗಿದೆ ಎಂದು ತಿಳಿಸಿದರು.
ಅನೇಕ ಕ್ರಾಂತಿಕಾರ್ಯ ಯೋಜನೆ ರೂಪಿಸಿ ಕಡು ಬಡವರ, ಹಿಂದುಳಿದ ವರ್ಗಗಳ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದ ಅರಸು ಅವರ ಜಯಂತಿ ಹಿನ್ನೆಲೆಯಲ್ಲಿ, ಅವರ ಮಾದರಿಯ ಆಡಳಿತದ ಕ್ರಮಗಳನ್ನು ಇಂದಿಗೂ ಪ್ರಸ್ತುತ ವಾಗಿದ್ದು ಅವುಗಳನ್ನು ಅನುಸರಿಸಬೇಕಿದೆ ಎಂದು ತಿಳಿಸಿದರು.
ಈ ವೇಳೆ ಉಪನ್ಯಾಸಕರಾಗಿ ಆದಿಕವಿ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಷಯದ ಸಹ ಪ್ರಾಧ್ಯಾಪಕರಾದ ಡಾ.ಕೆ.ವೆಂಕಟೇಶ ಅವರು ಮಾತನಾಡಿ, ದೇವರಾಜ ಅರಸು ಅವರು 1972 ರಿಂದ 1980ರವರೆಗೆ ಮುಖ್ಯಮಂತ್ರಿಯಾಗಿದ್ದರು. ಹುಣಸೂರು ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಅಧಿಕಾರದಲ್ಲಿದ್ದಾಗ ಸಾಮಾಜಿಕ ನ್ಯಾಯದ ಪರವಾಗಿ, ಬಡವರ ಪರವಾಗಿ ಕೆಲಸ ಮಾಡಿದರು.
ಮಲ ಹೊರುವ ಪದ್ದತಿ ನಿಲ್ಲಿಸಿ ಜೀತಪದ್ದತಿಗೆ ಮಂಗಳ ಹಾಡಿದರು. ಭೂಸುಧಾರಣೆ ಯೋಜನೆ ಇಡೀ ಜಗತ್ತಿನಲ್ಲಿ ಹೆಸರಾಯಿತು. ಅದಕ್ಕಾಗಿ ನಾವು ಅರಸು ಅವರನ್ನು ಸಾಮಾಜಿಕ ನ್ಯಾಯ ಹರಿಕಾರರೆಂದು ಕರೆಯುತ್ತೇವೆ ಎಂದರು.
ಅರಸು ಭಾವಚಿತ್ರ ಮೆರವಣಿಗೆ: ಹಿಂದುಳಿದ ವರ್ಗಗಳ ಧೀಮಂತ ನಾಯಕ, ಪರಿವರ್ತನೆಯ ಹರಿಕಾರ ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆಯ ಅಂಗವಾಗಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದವರೆಗೆ ಅರಸು ಅವರ ಭಾವಚಿತ್ರ ಮೆರವಣಿಗೆ ಅದ್ದೂರಿಯಾಗಿ ನಡೆಯಿತು. ಮೆರವಣಿಗೆಯಲ್ಲಿ ವಿವಿಧ ಮುಖಂಡರು ಭಾಗಿಯಾಗಿದ್ದರು.
ಸಾಧಕರು, ವಿದ್ಯಾರ್ಥಿಗಳಿಗೆ ಸನ್ಮಾನ: ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆಯ ಅಂಗವಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ವಸತಿ ನಿಲಯ ಹಾಗೂ ವಸತಿ ಶಾಲೆಯ ವಿದ್ಯಾರ್ಥಿಗಳು ಹತ್ತನೇ ತಗರತಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿವಿಧ ಗಣ್ಯರು ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭದಲ್ಲಿ ರಾಯಚೂರು ಮಹಾನಗರ ಪಾಲಿಕೆಯ ಅಧ್ಯಕ್ಷರಾದ ನರಸಮ್ಮ ನರಸಿಂಹಲು ಮಾಡಗಿರಿ, ಪೊಲೀಸ್ ಇಲಾಖೆಯ ಎರಡನೇಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುನೀತಾ ಕಾಂಬಳೆ, ಹಿಂದುಳಿದ ವರ್ಗಗಳ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಕೆ.ಶಾಂತಪ್ಪ , ಹನುಮಂತಪ್ಪ, ಕೆ.ಬಸವಂತಪ್ಪ, ಶ್ರೀಕಾಂತ್ ವಕೀಲ, ವಿಜಯಭಾಸ್ಕರ್ ಇಟಗಿ, ಸುರೇಖಾ, ಸೇರಿದಂತೆ ವಿವಿಧ ಸಮಾಜದ ಮುಖಂಡರು, ಮಹಿಳೆಯರು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Comments
Post a Comment