ಅಧಿಕ ಉಷ್ಣಾಂಶ ಹಿನ್ನಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಪ್ರಭಾರ ಜಿಲ್ಲಾಧಿಕಾರಿ ಈಶ್ವರ ಕುಮಾರ ಕಾಂದೂ ಸಲಹೆ


ಜಯ‌ ಧ್ವಜ ನ್ಯೂಸ್ ,ರಾಯಚೂರು ಏ. 17 - ಭಾರತೀಯ ಹವಾಮಾನ ಇಲಾಖೆಯ ವರದಿಯ ಪ್ರಕಾರ ರಾಯಚೂರು ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಅಧಿಕ ಉಷ್ಣಾಂಶ ದಾಖಲಾಗುವ ಸಾಧ್ಯತೆಯಿದ್ದು, ಬಿಸಿ ಗಾಳಿ (ಹೀಟ್ ವೇವ್) ಎಚ್ಚರಿಕೆ ನೀಡಲಾಗಿದೆ. ಹೀಟ್ ವೇವ್ ಸ್ಟ್ರೋಕ್ ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ ಕಾಂದೂ ಅವರು ಕೋರಿದ್ದಾರೆ.

ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಏನು ಮಾಡಬೇಕು ಎಂಬುದರ ಕುರಿತು ಮಾಹಿತಿಯನ್ನು ನೀಡಿದ್ದಾರೆ.

ಸಾರ್ವಜನಿಕರು ರೇಡಿಯೋ,ಟಿವಿ, ದಿನ ಪತ್ರಿಕೆಗಳಲ್ಲಿ ಬಿಸಿಲಿನ ತಾಪಮಾನದ ಕುರಿತು ಮುನ್ಸೂಚನೆಗಳನ್ನು ಪಡೆದುಕೊಳ್ಳಬೇಕು. ಬಾಯಾರಿಕೆಯಿಲ್ಲದಿದ್ದರೂ ಸಾಧ್ಯವಾದಷ್ಟು ಹೆಚ್ಚಾಗಿ ನೀರನ್ನು ಕುಡಿಯುವುದು. ತೆಳುವಾದ ಸಡಿಲವಾದ ಹತ್ತಿಯ ಉಡುಪುಗಳನ್ನು ಧರಿಸುವುದು, ಆದಷ್ಟು ಬಿಳಿ ಬಣ್ಣದ ಬಟ್ಟೆಗಳ ಬಳಕೆ ಒಳ್ಳೆಯದು.

ಬಿಸಿಲಿನಲ್ಲಿ ಹೊರಗೆ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಟೋಪಿ, ಬೂಟುಗಳು ಅಥವಾ ಚಪ್ಪಲಗಳನ್ನು ಬಳಸಿ. ದೂರದ ಪ್ರಯಾಣವನ್ನು ರಾತ್ರಿ ವೇಳೆ ಮಾಡುವುದು ಉತ್ತಮ, ಒಂದು ವೇಳೆ ಪ್ರಯಾಣ ಮಾಡುವ ಸಂದರ್ಭ ಬಂದರೆ ಪ್ರಯಾಣ ಮಾಡುವಾಗ ನಿಮ್ಮೊಂದಿಗೆ ನೀರನ್ನು ತೆಗೆದುಕೊಂಡು ಹೋಗುವುದು. ನೀವು ಹೊರಗೆ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿಯನ್ನು ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಸಹ ಬಳಸಬೇಕು.

ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ಶರಬತ್, ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ ಅದು ದೇಹವನ್ನು ಪುನಃ ತಂಪಾಗಿಡಲು ಸಹಾಯ ಮಾಡುತ್ತದೆ. ಪ್ರಾಣಿ/ಪಕ್ಷಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಿ. ಆದಷ್ಟು ಫ್ಯಾನಗಳನ್ನು ಬಳಸಿ, ಒದ್ದೆಯಾದ ಬಟ್ಟೆಗಳನ್ನು ಮತ್ತು ಆಗಾಗ್ಗೆ ತಣ್ಣೀರಿನಲ್ಲಿ ಸ್ನಾನ ಮಾಡಿ. ಕೆಲಸದ ಸಮಯವನ್ನು ಆದಷ್ಟು ತಂಪಾದ ಸಮಯದಲ್ಲಿ ಮಾಡುವುದು ಹಾಗೂ ಕೆಲಸದ ಸ್ಥಳದ ಬಳಿ ತಂಪಾದ ಕುಡಿಯುವ ನೀರನ್ನು ಒದಗಿಸಬೇಕು.

ಕೆಲಸ ನಿರ್ವಹಿಸುವ ಗರ್ಭಿಣಿ ಮಹಿಳೆಯರು ಮತ್ತು ಅನಾರೋಗ್ಯದಲ್ಲಿರುವ ಕಾರ್ಮಿಕರಿಗೆ ಹೆಚ್ಚಿನ ಗಮನ ನೀಡಬೇಕು. ಕಲ್ಲಂಗಡಿ, ಕರಬೂಜ, ಕಿತ್ತಳೆ ದ್ರಾಕ್ಷಿ, ಅನನಾಸ್, ಸೌತೆಕಾಯಿ, ಎಳನೀರನ್ನು ಹೆಚ್ಚಾಗಿ ಸೇವಿಸಬೇಕು. ನವಜಾತ ಶಿಶುಗಳು, ಹಿರಿಯ ನಾಗರಿಕರು ಹಾಗೂ ಚಿಕ್ಕ ಮಕ್ಕಳು, ಗರ್ಭಿಣಿಯರು, ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು, ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರು ಹಾಗೂ ಇತರ ಅರೋಗ್ಯ ಸಮಸ್ಯೆಗಳಿರುವವರು, ಅದರಲ್ಲೂ ವಿಶೇಷವಾಗಿ ಹೃದ್ರೋಗ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿರುವವರು ಹೆಚ್ಚು ಜಾಗರೂಕತೆ ವಹಿಸಬೇಕು.

ಸಾರ್ವಜನಿಕರು ಏನು ಮಾಡಬಾರದು: ಮಕ್ಕಳು ಅಥವಾ ಸಾಕುಪ್ರಾಣಿಗಳನ್ನು ಬಿಸಿಲಿನಲ್ಲಿ ನಿಲ್ಲಿಸಿದ ವಾಹನಗಳ ಹತ್ತಿರ ಬಿಡಬೇಡಿ. ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನ ತಾಪಮಾನವು ಅವರಿಗೆ ಹಾಗೂ ಅವುಗಳಿಗೆ ಅಪಾಯಕಾರಿಯಾಗಬಹುದು. ಕಪ್ಪು ಬಟ್ಟೆ ಅಥವಾ ಬಿಗಿಯಾದ ಬಟ್ಟೆಗಳನ್ನು ಧರಿಸುವುದನ್ನು ತಪ್ಪಿಸಬೇಕು. ಹೊರಗಿನ ತಾಪಮಾನ ಹೆಚ್ಚಾದಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಬೇಕು.

ಮಧ್ಯಾಹ್ನ 12 ರಿಂದ 3 ರವರೆಗೆ ಹೊರಗೆ ಕೆಲಸ ಮಾಡುವುದನ್ನು ತಪ್ಪಿಸಿ. ಬಿಸಿಲಿನ ಸಮಯದಲ್ಲಿ ಅಡುಗೆ ಮಾಡುವುದನ್ನು ತಪ್ಪಿಸಿ. ಅಡಿಗೆ ಪ್ರದೇಶವನ್ನು ಸಮರ್ಪಕವಾಗಿ ಗಾಳಿಯಾಡಲು ಬಾಗಿಲು ಮತ್ತು ಕಿಟಕಿಗಳನ್ನು ತೆರೆಬೇಕು. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಹಾನಿಕಾರಕ ಪಾನೀಯಗಳನ್ನು ಸೇವಿಸಬೇಡಿ. ಇವು ಹೊಟ್ಟೆ ನೋವನ್ನು ಉಂಟು ಮಾಡುತ್ತದೆ. ಹಾನಿಕಾರಕವಾದ ಆಹಾರ ಮತ್ತು ಹಳಸಿದ ಆಹಾರವನ್ನು ಸೇವಿಸಬಾರದು. ಅಲ್ಲದೆ ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ ಕಾಂದೂ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Comments

Popular posts from this blog