ಸುದ್ದಿಯ ಒತ್ತಡದ ನಡುವೆಯೂ ಕ್ರೀಡೆಗಳಲ್ಲಿ ಭಾಗವಹಿಸಿ ಆರೋಗ್ಯ ಕಾಪಾಡಿಕೊಳ್ಳಿ- ಜಿಲ್ಲಾಧಿಕಾರಿ ಪೂವಿತಾ ಎಸ್


ಜಯ ಧ್ವಜ ನ್ಯೂಸ್ ,ರಾಯಚೂರು, ಜೂನ್,23- ಸುದ್ದಿಯ ಒತ್ತಡದ ನಡುವೆಯೂ ಪತ್ರಕರ್ತರು ಕ್ರಿಕೆಟ್ ಸೇರಿದಂತೆ ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಬೇಕು ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್ ಹೇಳಿದರು.

ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ರಾಯಚೂರು ಜಿಲ್ಲಾ ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಪತ್ರಕರ್ತರಿಗಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕೋದ್ಯಮವು ಸಮಾಜದಲ್ಲಿ ಜಾಗೃತಿ ಮೂಡಿಸುವ ಮಹತ್ತರ ಜವಾಬ್ದಾರಿಯನ್ನು ನಿರಂತರವಾಗಿ ನಿರ್ವಹಿಸುತ್ತಿದೆ. ಸಾರ್ವಜನಿಕ ಸಮಸ್ಯೆಗಳನ್ನು ಬೆಳಕಿಗೆ ತಂದು ಜನರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಪತ್ರಕರ್ತರು ಮುಂದುವರಿಸಬೇಕು. ನಿತ್ಯದ ಕೆಲಸದ ಒತ್ತಡದ ನಡುವೆಯೂ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅಗತ್ಯ ಎಂದು ಹೇಳಿದರು.


ಪತ್ರಕರ್ತರು ದಿನನಿತ್ಯದ ಒತ್ತಡದ ಬದುಕಿನ ಮಧ್ಯೆಯೂ ಕ್ರಿಕೆಟ್ ಆಟದತ್ತ ಆಸಕ್ತಿ ತೋರಿರುವುದು ಶ್ಲಾಘನೀಯ ಸಂಗತಿಯಾಗಿದೆ. ಕ್ರೀಡೆಗಳು ದೈಹಿಕ ಆರೋಗ್ಯವನ್ನು ವೃದ್ಧಿಸುವುದರ ಜೊತೆಗೆ ಮಾನಸಿಕ ನೆಮ್ಮದಿಯನ್ನು ನೀಡುತ್ತವೆ. ಇದೇ ರೀತಿಯಲ್ಲಿ ಮುಂದೆಯೂ ಸಮಾಜದಲ್ಲಿರುವ ಸಮಸ್ಯೆಗಳ ಕುರಿತು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನ ಸೆಳೆಯುವ ಕಾರ್ಯವನ್ನು ಪತ್ರಕರ್ತರು ನಿರಂತರವಾಗಿ ಮಾಡಬೇಕು ಎಂದು ಕರೆ ನೀಡಿದರು.


ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷುಗಿರಿ ಮಾತನಾಡಿ, ಪ್ರತಿದಿನ ಸುದ್ದಿಗಳ ಬೆನ್ನತ್ತಿ ಹೆಚ್ಚಿನ ಒತ್ತಡದಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತರು ಕ್ರಿಕೆಟ್ ಆಡುವ ಮೂಲಕ ಮನರಂಜನೆ ಹಾಗೂ ಆರೋಗ್ಯದತ್ತ ಗಮನ ಹರಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಹೇಳಿದರು.


ಪತ್ರಕರ್ತರು ಕೆಲಸದ ಒತ್ತಡದ ಕಾರಣದಿಂದ ಆರೋಗ್ಯದ ಕಡೆ ನಿರ್ಲಕ್ಷ್ಯ ವಹಿಸಬಾರದು. ಆರೋಗ್ಯವೇ ಸಂಪತ್ತು ಎಂಬುದನ್ನು ಅರಿತು ದೈಹಿಕ ಕ್ಷೇಮದ ಕಡೆ ಹೆಚ್ಚಿನ ಗಮನ ನೀಡಬೇಕು. ಮುಂದಿನ ದಿನಗಳಲ್ಲಿ ಪತ್ರಕರ್ತರು ಮತ್ತು ಪೊಲೀಸ್ ಸಿಬ್ಬಂದಿಯ ನಡುವೆ ಸ್ನೇಹಪರ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಈರೇಶ್ ನಾಯಕ ಮಾತನಾಡಿ, ಪತ್ರಕರ್ತರು ಕೆಲಸದ ಜತೆಗೆ ಹವ್ಯಾಸಗಳನ್ನು ಬದಲಿಸಿಕೊಳ್ಳಬೇಕು. ಕ್ರೀಡೆ, ಯೋಗ, ವ್ಯಾಯಾಮದಂತ ಚಟುವಟಿಕೆಗಳಲ್ಲಿ ತೊಡಗಬೇಕು. ಇದೊಂದು ಉತ್ತಮ ಕಾರ್ಯವಾಗಿದ್ದು, ಎಲ್ಲರೂ ಕ್ರೀಡಾಕೂಟದಲ್ಲಿ ಸಕ್ರಿಯಾವಾಗಿ ಪಾಲ್ಗೊಳ್ಳಬೇಕು ಎಂದರು. 


ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆರ್. ಗುರುನಾಥ್, ರಾಜ್ಯ ಸಮಿತಿ ಸದಸ್ಯ ಬಸವರಾಜ ನಾಗಡದಿನ್ನಿ, ಜಿಲ್ಲಾ  ಪ್ರಧಾನ ಕಾರ್ಯದರ್ಶಿ  ಸಿದ್ದಯ್ಯಸ್ವಾಮಿ ಕುಕನೂರು, ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಅಧ್ಯಕ್ಷ ವಿಜಯ ಜಾಗಟಗಲ್, ಹಿರಿಯ ಪತ್ರಕರ್ತರಾದ ಶಿವಮೂರ್ತಿ ಹಿರೇಮಠ, ಭೀಮರಾಯ ಹದ್ದಿನಾಳ, ದತ್ತು ಸರ್ಕೀಲ್,  ಸಂಘದ ಪದಾಧಿಕಾರಿಗಳಾದ  ಶಿವಪ್ಪ ಮಡಿವಾಳ,ಅಶೋಕ್ ಬೆನ್ನೂರು, ಮಹಾನಂದ ನಾಯಕ,


ವಿಶ್ವನಾಥ್ ಹೂಗಾರ್, ಸೂಗುರೇಶ ಗುಡಿ, ಮಲ್ಲಿಕಾರ್ಜುನಯ್ಯ, ಲಕ್ಷ್ಮಣ್ ಕಪಗಲ್, ಸುರೇಶ ರೆಡ್ಡಿ, ಪ್ರಸನ್ನ ಜೈನ್, ಮುತ್ತಣ್ಣ ಹೇಳವರ್, ಶೇಖರ್ ಯರದಿಹಾಳ್, ಎಲ್ಲ ತಾಲೂಕು ಘಟಕಗಳ ಪದಾಧಿಕಾರಿಗಳು, ಜಿಲ್ಲೆಯ ಪತ್ರಕರ್ತರು, ಛಾಯಾಗ್ರಹಕರು ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

Comments

Popular posts from this blog